July 26, 2024

Vokkuta News

kannada news portal

ಜನರ ಸಮಸ್ಯೆಗಳ ತ್ವರಿತ ಇತ್ಯರ್ಥವೇ ಜನತಾ ದರ್ಶನದ ಧ್ಯೇಯ: ಪ್ರಥಮ ಸಭೆಯಲ್ಲಿ ದಿನೇಶ್ ಗುಂಡೂರಾವ್.

ಮಂಗಳೂರು: ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ನಡೆದ‌ ಜನತಾ ದರ್ಶನದಲ್ಲಿ ಒಟ್ಟು 366 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಅರ್ಜಿಗಳನ್ನು ಸಂಭಂದಿಸಿದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಅರ್ಜಿಗಳಿಗೆ ಸಕಾಲಕ್ಕೆ ಪರಿಹಾರ ನೀಡುವ ಮೂಲಕ ಜನರಿಗೆ ಸ್ಪಂದಿಸಬೇಕು.ಆಗ ಮಾತ್ರ ಅವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ‌ ಎಂಬ ಅಭಿಪ್ರಾಯ ಮೂಡುತ್ತದೆ ಅದಕ್ಕೆ ಪ್ರಮಾಣಿಕ ಪ್ರಯತ್ನ ಅಗತ್ಯ ಎಂದರು.
ಸ್ವೀಕರಿಸಲಾದ 366 ಅರ್ಜಿಗಳಿಗೆ ಆದ್ಯತಾ ರೀತಿಯಲ್ಲಿ ಕ್ರಮವಹಿಸಬೇಕೆಂಬುದನ್ನು ಷರಾ ನಮೂದಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜನತಾ ದರ್ಶನ‌ ಮಾಡಲಾಗುವುದು, ಇದರ‌ ಮುಖ್ಯ ಉದ್ದೇಶ ಸಾರ್ವಜನಿಕರಿಗೆ ಆಗಬೇಕಾದ ಕೆಲಸ ಕಾರ್ಯಗಳನ್ನು ತ್ವರಿತವಾಗಿ ಮಾಡಿಕೊಡುವುದು ಹಾಗೂ ಅವರ ಕಾನೂನು ಬದ್ದ ಬೇಡಿಕೆಯನ್ನು ಈಡೇರಿಸುವುದಾಗಿದೆ, ಮತ್ತು ವಿಳಂಬವಾಗದಂತೆ ಮತ್ತು ಜನರ ಕೆಲಸ ಕಾರ್ಯಗಳಿಗೆ ಅವರನ್ನು ವೃಥಾ ಓಡಾಡಿಸಬಾರದು,‌ ಜನರಿಗೆ ಕಿರುಕುಳ, ತೊಂದರೆ‌ ಆಗದಂತೆ ಕ್ರಮವಹಿಸಬೇಕು ಎಂದರು

ರಾಜ್ಯದ ಮುಖ್ಯಮಂತ್ರಿಗಳು ಈ ಜನ ಸ್ಪಂದನ ಕಾರ್ಯಕ್ರಮವನ್ನು ಇಡೀ ವರ್ಷದ ಕಾರ್ಯಕ್ರಮವಾಗಿ ಆಯೋಜಿಸಿದ್ದು , ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಪ್ರಯತ್ನಿಸಿದ್ದಾರೆ,

ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ,‌ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ‌ ಇಲಾಖೆಗಳ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಸಚಿವರು ಹೇಳಿದರು.

ವಿಧಾನ ಸಭಾ ಸದಸ್ಯರಾದ ಅಶೋಕ್ ಕುಮಾರ್‌ ರೈ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್,‌ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್,‌‌ ನಗರ‌ ಪೊಲೀಸ್ ಆಯುಕ್ತ ಅನುಪಮ್‌ ಅರ್ಗವಾಲ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಅಗಾಧ ಸಾರ್ವಜನಿಕರು ಉಪಸ್ಥಿತರಿದ್ದರು.